ಗದಗ: ಒಂದೇ ಕುಟುಂಬದ ನಾಲ್ವರನ್ನು ಭೀಕರ ಹತ್ಯೆಗೈದಿರುವ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ.
ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನರ ಕೊಲೆಯಾಗಿದ್ದು, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮಿ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು.
ಮೊದಲನೇ ಮಹಡಿಯ ಕೊಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳ ಕೊಲೆಯಾಗಿದ್ದು, ಈ ಮೂವರು ಕೊಪ್ಪಳ ಮೂಲದವರು ಎಂದು ತಿಳಿದು ಬಂದಿದೆ.
ಕೊಲೆ ನಡೆದ ಸ್ಥಳಕ್ಕೆ ಬೆಳಗಾವಿ ಉತ್ತರ ವಲಯದ ಐಜಿಪಿ ವಿಕಾಸಕುಮಾರ ವಿಕಾಸ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗದಗದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಐಜಿಪಿ, ಅಪರಾಧಗಳ ಪತ್ತೆಗಾಗಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಸದ್ಯ ಸಿಕ್ಕಿರುವ ಪ್ರಾಥಮಿಕ ಮಾಹಿತಿ ಆಧಾರದ ಮೇಲೆ ವಿಭಿನ್ನ ಆಯಾಮಗಳಲ್ಲಿ ತನಿಖೆ ಮಾಡಲಾಗುವುದು ಎಂದರು.
ಘಟನೆಯನ್ನು ಗಮನಿಸಿದರೆ ಕಳ್ಳತನ, ದರೋಡೆಗೆ ಬಂದಿದ್ದಲ್ಲ, ಕೊಲೆ ಉದ್ದೇಶಕ್ಕೆ ಬಂದಿರುವುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ. ತನಿಖೆ ನಂತರವಷ್ಟೇ ನಿಖರ ಕಾರಣ ಗೊತ್ತಾಗಲಿದೆ. ಆರೋಪಿಗಳನ್ನು ಶೀಘ್ರದಲ್ಲಿ ವಶಕ್ಕೆ ಪಡೆಯಲಾಗುವುದು ಎಂದರು.
Leave a Reply